ಸುಬ್ರಹ್ಮಣ್ಯ: ದ.ಕ ಜಿಲ್ಲೆಯ ಹಲವು ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ಧರ್ಮಸ್ಥಳ, ಕೊಲ್ಲೂರು, ಕಟೀಲು ದೇವಸ್ಥಾನಗಳಿಗೆ ಹೆಚ್ಚಾಗಿ ಭೇಟಿ ನೀಡುತ್ತಿದ್ದು, ಇಂದು ಕುಕ್ಕೆಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕರ್ನಾಟಕ ಜನತೆಯ ಸುಭೀಕ್ಷೆಗಾಗಿ ಪ್ರಾರ್ಥಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಮಾಧ್ಯಮದೊಂದಿಗೆ ಮಾತನಾಡಿದರು. ಧರ್ಮಸ್ಥಳಕ್ಕೆ ಆಗಮಿಸಿದ ಬಳಿಕ ಹೆಲಿಕಾಪ್ಟರ್ ಮೂಲಕ ಬಿಳಿನೆಲೆಗೆ ಆಗಮಿಸಿ ಸುಬ್ರಹ್ಮಣ್ಯಕ್ಕೆ ಬಂದಿದ್ದು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಹಾಗೂ ಕಾರ್ಯನಿರ್ವಾಹಣಾಧಿಕಾರಿ ಡಾ. ನಿಂಗಯ್ಯ ಹೂ ಗುಚ್ಚ ನೀಡಿ ಸ್ವಾಗತಿಸಿದರು. ಮುಖ್ಯಮಂತ್ರಿ ಆಡಳಿತ ಕಚೇರಿಗೆ ತೆರಳಿ ವಸ್ತ್ರ ಬದಲಿಸಿ ದೇವಸ್ಥಾನಕ್ಕೆ ತೆರಳಿದರು. ದೇವರಿಗೆ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಬಳಿಕ ಸಂಪುಟ ನರಸಿಂಹ ಸ್ವಾಮಿ ದೇವರ ದರ್ಶನ ಪಡೆದರು. ಹೊಸಲಿಗಮ್ಮ ದೈವದ ದರ್ಶನ ಪಡೆದು ಅಲ್ಲಿಂದ ನಿರ್ಗಮಿಸಿದರು. ಮುಖ್ಯಮಂತ್ರಿ ಆಗಮನವಾಗುತ್ತಿದ್ದಂತೆ ಮಳೆಯ ಸಿಂಚನ ಆಗಿರುವುದು ವಿಶೇಷವಾಗಿತ್ತು.
ಸಿಎಂ ಆಶೀರ್ವಾದ ಪಡೆದ ಮುರುಳ್ಯ:
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರಿಚಯ ಮಾಡಿಕೊಂಡರು. ಬಳಿಕ ಮುಖ್ಯಮಂತ್ರಿಯ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದರು. ಬಿಜೆಪಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.