ಬೆಂಗಳೂರು: ಬಿಜೆಪಿ ತೊರೆಯಲು ನಿರ್ಧರಿಸಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇಂದು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಲಕ್ಷ್ಮಣ್ ಸವದಿ, ಇಂದು ಬಿಜೆಪಿಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಸಂಜೆ 4 ಗಂಟೆಗೆ ಸಭಾಪತಿಯನ್ನ ಭೇಟಿಯಾಗಿ ರಾಜೀನಾಮೆ ಪತ್ರ ನೀಡುತ್ತೇನೆ. ರಾಜೀನಾಮೆ ನೀಡಿದ ಬಳಿಕ ಡಿ.ಕೆ ಶಿವಕುಮಾರ್ ಮತ್ತು ಸಿದ್ಧರಾಮಯ್ಯರನ್ನ ಭೇಟಿಯಾಗುವೆ ಎಂದಿದ್ದಾರೆ.
ಇಂದು ಸಂಜೆ 4ಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಭೇಟಿಯಾಗಿ, ರಾಜೀನಾಮೆ ಸಲ್ಲಿಸುವೆ. ನಂತರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವೆ. ಬಿಜೆಪಿ ತೊರೆಯಲು ನಿನ್ನೆಯೇ ನಿರ್ಧಾರ ಮಾಡಿದ್ದೇನೆ. ಹಾಗಾಗಿ ಬಿಜೆಪಿಯ ಯಾವುದೇ ನಾಯಕರನ್ನು ಭೇಟಿಯಾಗಲ್ಲ. ನಾನು ಇನ್ನೂ ಬಿಜೆಪಿ ಮನೆಯಲ್ಲೇ ಇದ್ದೇನೆ, ಬೇರೆ ಮಾತಾಡಲ್ಲ. ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ನಂತರ ಬೇರೆ ವಿಚಾರದ ಚರ್ಚೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.